ಬೆಂಗಳೂರು: ಕಾಂಗ್ರೆಸ್ -ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಸಚಿವರಾಗಿದ್ದ ಪ್ರಭಾವಿ ಕಾಂಗ್ರೆಸ್ ನಾಯಕರೊಬ್ಬರು ಶೀಘ್ರದಲ್ಲೇ ಬಿಜೆಪಿ ಸೇರಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಕೇಂದ್ರದ ಏಜೆನ್ಸಿಗಳಾದ ಐಟಿ ಮತ್ತು ಇಡಿಗಳ ದಾಳಿ ತಪ್ಪಿಸಿಕೊಳ್ಳಲು ಬಿಜೆಪಿ ಸೇರುತ್ತಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.
ಕೇಸರಿ ಪಾಳೆಯ ಸೇರಲು ಮೊದಲ ಸುತ್ತಿನ ಮಾತುಕತೆ ಮುಗಿದಿದೆ ಎಂದು ಮೂಲಗಳು ತಿಳಿಸಿವೆ. ಯಾವುದೇ ಸಮಯದಲ್ಲಿ ಬೇಕಾದರೂ ಸೇರುವ ಸಾಧ್ಯತೆಯಿದೆ ಎಂದು ತಿಳಿದು ಬಂದಿದೆ.
ಈ ಮೊದಲು ಕಳೆದ ವಾರ ಕಾಂಗ್ರೆಸ್ ರಾಜ್ಯಸಭೆ ಸದಸ್ಯ ಕೆ.ಸಿ ರಾಮಮೂರ್ತಿ ಕಾಂಗ್ರೆಸ್ ಗೆ ರಾಜಿನಾಮೆ ನೀಡಿದ್ದರು. ಅದಾದ ಕೆಲವೇ ದಿನಕ್ಕೆ ಮತ್ತೊಬ್ಬ ಕಾಂಗ್ರೆಸ್ ನಾಯಕರೊಬ್ಬರು ಪಕ್ಷ ತೊರೆಯಲು ತಯಾರಾಗಿದ್ದಾರೆ.
ಕೇಂದ್ರದ ಏಜೆನ್ಸಿಗಳ ಒತ್ತಡ ತಾಳಲಾರದೇ ಹಲವು ನಾಯಕರು ಕಾಂಗ್ರೆಸ್ ತೊರೆದು ಬಿಜೆಪಿ ಸೇರುತ್ತಿದ್ದಾರೆ ಎಂದು ಮಾಜಿ ಸಂಸದ ವಿ.ಎಸ್ ಉಗ್ರಪ್ಪ ಆರೋಪಿಸಿದ್ದಾರೆ,
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಇಂದು ತಿಹಾರ್ ಜೈಲಿನಲ್ಲಿರುವ ಮಾಜಿ ಸಚಿವ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಲಿದ್ದಾರೆ, ಗುಜರಾತ್ ರಾಜ್ಯಸಭೆ ಚುನಾವಣೆ ವೇಳೆ ಅಹ್ಮದ್ ಪಟೇಲ್ ಅವರನ್ನು ಚುನಾವಣೆಲ್ಲಿ ಗೆಲ್ಲಿಸುವ ಉದ್ದೇಶದಿಂದ ಗುಜರಾತ್ ಕಾಂಗ್ರೆಸ್ ಶಾಸಕರನ್ನು ಡಿಕೆ ಶಿವಕುಮಾರ್ ಈಗಲ್ ಟನ್ ರೆಸಾರ್ಟ್ ನಲ್ಲಿಟ್ಟಿದ್ದರು ಈ ಹಿನ್ನೆಲೆಯಲ್ಲಿ ಶಿವಕುಮಾರ್ ಮನೆ ಮೇಲೆ ಐಟಿ ಹಾಗೂ ಇಡಿ ದಾಳಿ ನಡೆದಿದೆ ಎಂದು ಕಾಂಗ್ರೆಸ್ ಆರೋಪಿಸುತ್ತಲೇ ಬಂದಿದೆ.
ಅದಾದ ನಂತರ ಮಾಜಿ ಸಂಸದ ಆರ್ ಎಲ್ ಜಾಲಪ್ಪ ಮತ್ತು ಮಾಜಿ ಡಿಸಿಎಂ ಪರಮೇಶ್ವರ್ ಮನೆ ಮೇಲೂ ಐಟಿ ದಾಳಿ ನಡೆಸಲಾಗಿದೆ. ಈಗ ಕಾಂಗ್ರೆಸ್ ತೊರೆಯುತ್ತಿರುವ ನಾಯಕ ಕ್ಲೀನ್ ಇಮೇಜ್ ಇರುವ ವ್ಯಕ್ತಿಯಾಗಿದ್ದಾರೆ, ಆದರೆ ಇತ್ತೀಚಿನ ಕೆಲವು ಬೆಳವಣಿಗೆಗಳಿಂದ ಕಾಂಗ್ರೆಸ್ ತೊರೆಯಲು ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ. (KANNADA PRABHA)