ಬೇತುಲ್ (ಮಧ್ಯ ಪ್ರದೇಶ): ಮಧ್ಯಪ್ರದೇಶದ ಬೇತುಲ್ ಜಿಲ್ಲೆಯ ಜಲ್ಲಾರ್ನಲ್ಲಿ ಖಾಲಿ ಬಸ್ಗೆ ಸ್ಪೋರ್ಟ್ಸ್ ಯುಟಿಲಿಟಿ ವೆಹಿಕಲ್ ಕಾರು (SUV) ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಕ್ಕಳು ಸೇರಿದಂತೆ 11 ಜನರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಜಿಲ್ಲಾ ಕೇಂದ್ರದಿಂದ ಸುಮಾರು 36 ಕಿ.ಮೀ ದೂರದಲ್ಲಿರುವ ಭೈನ್ಸ್ದೇಹಿ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ ಎಂದು ಬೇತುಲ್ ಪೊಲೀಸ್ ನಿಯಂತ್ರಣ ಕೊಠಡಿಯ ಸಹಾಯಕ ಸಬ್ ಇನ್ಸ್ಪೆಕ್ಟರ್ ಶಿವರಾಜ್ ಸಿಂಗ್ ಠಾಕೂರ್ ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.
ಬೆಳಗಿನ ಜಾವ 2 ಗಂಟೆ ಸುಮಾರಿಗೆ ನಡೆದ ಈ ಅಪಘಾತದಲ್ಲಿ ಆರು ಪುರುಷರು, ಮೂವರು ಮಹಿಳೆಯರು, ಸುಮಾರು ಐದು ವರ್ಷದ ಬಾಲಕಿ ಮತ್ತು ಅಂಬೆಗಾಲಿಡುವ ಮಗು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಅವರು ಹೇಳಿದರು.
ಮೃತರು ಕಾರ್ಮಿಕರಾಗಿದ್ದು ಅವರು ನೆರೆಯ ಮಹಾರಾಷ್ಟ್ರದ ಅಮರಾವತಿಯಿಂದ ತಮ್ಮೂರಿಗೆ ವಾಪಸಾಗುತ್ತಿದ್ದರು. ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.
ಎಸ್ ಯುವಿ ಚಾಲಕ ನಿದ್ದೆಯ ಮಂಪರಿನಲ್ಲಿ ಚಲಾಯಿಸಿದ್ದೇ ಅಪಘಾತಕ್ಕೆ ಕಾರಣ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದ್ದು, ಪೊಲೀಸು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಪ್ರಧಾನಿ ಕಂಬನಿ, ಪರಿಹಾರ ಘೋಷಣೆ: ಅಪಘಾತದಲ್ಲಿ ಪ್ರಯಾಣಿಕರ ಸಾವಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ತೀವ್ರ ಕಂಬನಿ ಮಿಡಿದಿದ್ದು ಕುಟುಂಬಸ್ಥರಿಗೆ 2 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ನಾಗರಿಕರ ಸಾವು ತೀವ್ರ ದುಃಖ ತಂದಿದೆ. ಅವರ ಕುಟುಂಬಸ್ಥರಿಗೆ ಪ್ರಧಾನ ಮಂತ್ರಿ ನೈಸರ್ಗಿಕ ಪ್ರಕೃತಿ ವಿಕೋಪ ನಿಧಿಯಿಂದ ತಲಾ 2 ಲಕ್ಷ ರೂಪಾಯಿ ಹಾಗೂ ಗಾಯಗೊಂಡವರಿಗೆ 50 ಸಾವಿರ ರೂಪಾಯಿ ನೀಡುವುದಾಗಿ ಘೋಷಿಸಿದ್ದಾರೆ. (AIR NEWS)