ಬೆಂಗಳೂರು: ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಗೆ 124 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಕಾಂಗ್ರೆಸ್ ಶನಿವಾರ ಬೆಳಿಗ್ಗೆ ಪ್ರಕಟಿಸಿದೆ.
ಮೊದಲ ಪಟ್ಟಿಯಲ್ಲಿ ಬಹುತೇಕ ಹಾಲಿ ಶಾಸಕರಿಗೆ ಟಿಕೆಟ್ ನೀಡಲಾಗಿದೆ. ಪುತ್ರನಿಗೆ ಟಿಕೆಟ್ ನೀಡಬೇಕು ಎಂದು ಪಾವಗಡದ ಹಾಲಿ ಶಾಸಕ ವೆಂಕಟರಮಣಪ್ಪ ಮನವಿ ಮಾಡಿದ್ದರು. ಪುತ್ರನಿಗೆ ಟಿಕೆಟ್ ನೀಡಲಾಗಿದೆ. ಹಾಲಿ ಶಾಸಕರು ಇರುವ ಪುಲಕೇಶಿನಗರ (ಅಖಂಡ ಶ್ರೀನಿವಾಸಮೂರ್ತಿ), ಹರಿಹರ (ಎಂ. ರಾಮಪ್ಪ), ಕುಂದಗೋಳ (ಕುಸುಮಾ ಶಿವಳ್ಳಿ), ಲಿಂಗಸುಗೂರು (ಡಿ.ಎಸ್.ಹೂಲಗೇರಿ), ಅಫಜಲಪುರ (ಎಂ.ವೈ.ಪಾಟೀಲ), ಶಿಡ್ಲಘಟ್ಟ (ವಿ.ಮುನಿಯಪ್ಪ) ಕ್ಷೇತ್ರಗಳಿಗೆ ಅಭ್ಯರ್ಥಿಯ ಹೆಸರನ್ನು ಘೋಷಿಸಿಲ್ಲ.
ಕಾಂಗ್ರೆಸ್ ಕಾರ್ಯಾಧ್ಯಕ್ಷ ಧ್ರುವನಾರಾಯಣ ಇತ್ತೀಚೆಗೆ ನಿಧನರಾಗಿದ್ದಾರೆ. ಅವರ ಪುತ್ರ ದರ್ಶನ್ ಧ್ರುವನಾರಾಯಣ ಅವರಿಗೆ ನಂಜನಗೂಡಿನಲ್ಲಿ ಟಿಕೆಟ್ ನೀಡಬೇಕು ಎಂದು ಕಾರ್ಯಕರ್ತರು ಒತ್ತಾಯಿಸಿದ್ದರು. ದರ್ಶನ್ ಅವರನ್ನು ನಂಜನಗೂಡಿಯಲ್ಲಿ ಕಣಕ್ಕೆ ಇಳಿಸಲಾಗಿದೆ.
ಇದನ್ನೂ ಓದಿ: ವಿಧಾನಸಭಾ ಚುನಾವಣೆ: ಜೆಡಿಎಸ್ ಪರ ಮಮತಾ ಬ್ಯಾನರ್ಜಿ ಪ್ರಚಾರ ನಡೆಸಲಿದ್ದಾರೆ; ಹೆಚ್'ಡಿ ಕುಮಾರಸ್ವಾಮಿ
ಇನ್ನೂ ದಿವಂಗತ ಮಹಾದೇವ ಪ್ರಸಾದ್ ಪುತ್ರ ಗಣೇಶ್ ಪ್ರಸಾದ್ ಅವರಿಗೂ ಟಿಕೆಟ್ ನೀಡಲಾಗಿದೆ. ಬೆಳ್ತಂಗಡಿಯಲ್ಲಿ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್ ಸಹೋದರ ಬಿ.ಕೆ.ಶಿವರಾಮ್ ಪುತ್ರ ರಕ್ಷಿತ್ ಶಿವರಾಮ್ ಅವರಿಗೆ ಟಿಕೆಟ್ ಘೋಷಿಸಲಾಗಿದೆ.
ಇನ್ನೂ ಈ ಬಾರಿ ಕಾಂಗ್ರೆಸ್ ಪಕ್ಷದಲ್ಲಿ ತಂದೆ- ಮಕ್ಕಳು ತಮ್ಮ ಅದೃಷ್ಟ ಪರೀಕ್ಷಿಸಿಲಿದ್ದಾರೆ. ಬೆಂಗಳೂರಿನ ವಿಜಯನಗರದಿಂದ ಎಂ.ಕೃಷ್ಣಪ್ಪ , ಅವರ ಪುತ್ರ ಪ್ರಿಯಾ ಕೃಷ್ಣಗೆ ಗೋವಿಂದರಾಜನಗರ ಟಿಕೆಟ್ ಘೋಷಿಸಲಾಗಿದೆ.
ಇನ್ನೂ ಬಿಟಿಎಂ ಲೇಔಟ್ ನಿಂದ ರಾಮಲಿಂಗಾ ರೆಡ್ಡಿ ಕಣಕ್ಕಿಳಿಯಲಿದ್ದು, ಅವರ ಪುತ್ರಿ ಸೌಮ್ಯಾ ರೆಡ್ಡಿ ಜಯನಗರದಿಂದ ಕಣಕ್ಕಿಳಿಯಲಿದ್ದಾರೆ. ದಾವಣಗೆರೆ ದಕ್ಷಿಣದಿಂದ ಶಾಮನೂರ ಶಿವಶಂಕರಪ್ಪ ಹಾಗೂ ಅವರ ಪುತ್ರ ಎಸ್ ಎಸ್ ಮಲ್ಲಿಕಾರ್ಜುನ ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ.
ಮಾಜಿ ಸಂಸದ ಕೆ.ಎಚ್ ಮುನಿಯಪ್ಪ ದೇವನಹಳ್ಳಿ ಕ್ಷೇತ್ರದಿಂದ ಹಾಗೂ ಅವರ ಪುತ್ರಿ ರೂಪಾ ಕೆಜಿಎಫ್ ವಿಧಾನಸಭಾ ಕ್ಷೇತ್ರದಿಂದ ಅದೃಷ್ಯ ಪರೀಕ್ಷೆಗಿಳಿಯಲಿದ್ದಾರೆ. (KANNAD PRABHA)